ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಪ್ರತಿಷ್ಠಿತ ಯೋಜನೆಯಲ್ಲಿ ಒಂದಾಗಿರುವ ಪ್ಲೈಓವರ್ ನಿರ್ಮಾಣ ಕಾಮಗಾರಿ ದಿನದಿಂದ ದಿನಕ್ಕೆ ಚುರುಕು ಪಡೆದುಕೊಂಡಿದ್ದು, ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಹೃದಯ ಭಾಗದಲ್ಲಿರುವ ಬಸವವನದಲ್ಲಿರುವ ಬಸವೇಶ್ವರರ ಪುತ್ಥಳಿ ಸ್ಥಳಾಂತರಕ್ಕೆ ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ಸೂಕ್ತ ಕ್ರಮಗಳನ್ನು ಜರುಗಿಸುವಂತೆ ಬಸವ ಬಳಗ ಒತ್ತಾಯಿಸಿದರು.
ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಪರಿಶೀಲನೆ ನಡೆಸಿ ಬಸವ ಬಳಗದ ಸದಸ್ಯರೊಂದಿಗೆ ಹಾಗೂ ಹುಬ್ಬಳ್ಳಿಯ ನಾಗರಿಕರ ಜೊತೆಗೆ ಸಮಾಲೋಚನೆ ನಡೆಸಿ ಬಸವೇಶ್ವರ ಪುತ್ಥಳಿ ಸ್ಥಳಾಂತರ ಕುರಿತು ನಿರ್ಧಾರಕ್ಕೆ ಮುಂದಾಗಿದ್ದಾರೆ.
ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಪ್ಲೈಓವರ್ ಕಾಮಗಾರಿ ಆರಂಭಗೊಂಡಿದ್ದು, ಪ್ಲ್ಯಾನ್ ಪ್ರಕಾರ ಬಸವ ವನದ ಹತ್ತಿರ ಬರುವ ಪ್ಲೈಓವರ್ ಮೂರ್ತಿಗೆ ಹೊಂದಿಕೊಂಡು ಬರುವ ಹಿನ್ನೆಲೆಯಲ್ಲಿ ಬಸವೇಶ್ವರ ಪುತ್ಥಳಿ ಸ್ಥಳಾಂತರ ಮಾಡುವುದು ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ಸ್ಥಳ ಪರಿಶೀಲನೆ ಮಾಡಿ ಸ್ಥಳೀಯರ ಹಾಗೂ ಸಂಘಟನೆಗಳ ಸಹಕಾರದೊಂದಿಗೆ ಮೂರ್ತಿಯನ್ನು ಸ್ಥಳಾಂತರ ಮಾಡಲಾಗುತ್ತದೆ ಎಂದರು.
ಈಗಾಗಲೇ ಸಾರ್ವಜನಿಕರ ಅಭಿಪ್ರಾಯ ಹಾಗೂ ಸಮಾಜದವರ ಸಲಹೆ ಮೇರೆಗೆ ಸೂಚಿಸಿದ ಸ್ಥಳದಲ್ಲಿ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ಅಲ್ಲದೆ ಮತ್ತೊಮ್ಮೆ ಡಿಸೈನ್ ತಯಾರಿಸಿ ಎಲ್ಲರ ಒಮ್ಮತದ ಅಭಿಪ್ರಾಯ ಸಂಗ್ರಹಿಸಿ ಸ್ಥಳಾಂತರ ಮಾಡಲಾಗುತ್ತದೆ ಎಂದು ಅವರು ಹೇಳಿದರು.
ಇನ್ನೂ ಮೂರ್ತಿಗೆ ಯಾವುದೇ ರೀತಿಯಲ್ಲಿ ದಕ್ಕೆಯಾಗದಂತೆ ಸೂಕ್ತ ತಂತ್ರಜ್ಞಾನದ ಮೂಲಕ ಸ್ಥಳಾಂತರ ಮಾಡಲಾಗುತ್ತದೆ ಎಂದು ಅವರು ಭರವಸೆ ನೀಡಿದರು.
