ಬೆಂಗಳೂರು: ಮೇಕೆದಾಟು ಪಾದಯಾತ್ರೆ ಸಂದರ್ಭದಲ್ಲಿ ಕೋವಿಡ್ ನಿಯಮಾವಳಿ ಉಲ್ಲಂಘಿಸಿದ ಕಾರಣ ನೀಡಿ ವಿಚಾರಣೆಗೆ ಹಾಜರಾಗುವಂತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ನೋಟಿಸ್ ನೀಡಲಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಲಯದಿಂದ ಸಮನ್ಸ್ ಜಾರಿಯಾಗಿದೆ. ನಾಳೆ ನಡೆಯುವ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಲಾಗಿದೆ. ಮೇಕೆದಾಟು ಯೋಜನೆ ಜಾರಿಗೊಳಿಸುವಂತೆ ಆಗ್ರಹಿಸಿ ಜನವರಿ ಹಾಗೂ ಫೆಬ್ರವರಿಯಲ್ಲಿ ಎರಡು ಹಂತದಲ್ಲಿ ತಲಾ ಐದು ದಿನ ಕಾಂಗ್ರೆಸ್ ನಾಯಕರು ಪಾದಯಾತ್ರೆ ನಡೆಸಿದ್ದರು. ಈ ವೇಳೆ ಕೋವಿಡ್ ನಿಯಮ ಉಲ್ಲಂಘಿಸಲಾಗಿದೆ ಎಂದು ಸಮನ್ಸ್ ಜಾರಿಯಾಗಿದೆ.
ಕನಕಪುರ ತಾಲೂಕಿನ ಮೇಕೆದಾಟು ಸಮೀಪದ ಸಂಗಮ ಸ್ಥಳದಿಂದ ಆರಂಭವಾಗಿದ್ದ ಪಾದಯಾತ್ರೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದಿತ್ತು. 10 ದಿನಗಳ ನಿರಂತರ ಕಾಲ್ನಡಿಗೆ ಮೂಲಕ ರಾಮನಗರದಿಂದ ಬೆಂಗಳೂರು ತಲುಪಲು ಪಾದಯಾತ್ರೆ ಕಾರ್ಯಕ್ರಮ ರೂಪಿಸಲಾಗಿತ್ತು. ಆದರೆ ಕೋವಿಡ್ ನಿಯಮಾವಳಿಗಳನ್ನು ಮುಂದಿಟ್ಟು ಎದುರಾದ ಆಕ್ಷೇಪಗಳ ಹಿನ್ನೆಲೆ ಪಾದಯಾತ್ರೆಯನ್ನು ಕಾಂಗ್ರೆಸ್ ನಾಯಕರು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದರು.
