ಬೆಂಗಳೂರು : ಬೆಳಗಾವಿ ಜಿಲ್ಲೆಯ ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆ ಪ್ರಕರಣ ಸಂಬಂಧ ತನಿಖೆ ನಡೆಸಿ ಉಡುಪಿ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದರು. ಈ ಪ್ರಕರಣದಲ್ಲಿ ಬಿ ರಿಪೋರ್ಟ್ ಮೂಲಕ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರನ್ನು ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಂತೋಷ್ ಪಾಟೀಲ ಕುಟುಂಬಸ್ಥರು ತಕರಾರು ಅರ್ಜಿ ಸಲ್ಲಿಸಿದ್ದಾರೆ.ಉಡುಪಿ ಪೊಲೀಸರು ನಡೆಸಿದ ತನಿಖೆ ನ್ಯಾಯಯುತವಾಗಿಲ್ಲ. ಪೂರ್ವಾಗ್ರಹ ಪೀಡಿತರಾಗಿ ತನಿಖೆ ನಡೆಸಿದ್ದಾರೆ. ಪಾರದರ್ಶಕ ತನಿಖೆಗಾಗಿ ಸಿಬಿಐಗೆ ಕೇಸನ್ನು ಒಪ್ಪಿಸಬೇಕೆಂದು ಕೋರಿ ನ್ಯಾಯಾಲಯಕ್ಕೆ ಮೃತ ಸಂತೋಷ್ ಸಹೋದರ ಪ್ರಶಾಂತ್ ಅವರು ತಕರಾರು ಅರ್ಜಿ ಸಲ್ಲಿಸಿದ್ದಾರೆ. ಈ ಬೆಳವಣಿಗೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಮತ್ತೆ ಸಂಕಷ್ಟ ತಂದಿದೆ.
ಈ ಕುರಿತು ಪ್ರಶಾಂತ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ರು, ಸಂತೋಷ್ ಪಾಟೀಲ್ ಆತ್ಮಹತ್ಯೆ ಹಿಂದೆ ಹಲವರ ಕೈವಾಡವಿದೆ. ಉಡುಪಿ ಪೊಲೀಸರು ಸರಿಯಾದ ಮಾರ್ಗದಲ್ಲಿ ತನಿಖೆ ನಡೆಸದೆ ಹಾದಿ ತಪ್ಪಿಸಿದ್ದಾರೆ. ತನಿಖೆ ವೇಳೆ ಹಲವು ರೀತಿಯ ಪ್ರಭಾವ ಬೀರಲಾಗಿದೆ. ಹೀಗಾಗಿ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಪ್ರಶ್ನಿಸಿ ಕಾನೂನು ಹೋರಾಟ ನಡೆಸುವೆ ಎಂದಿದ್ದಾರೆ.
ಕಾಮಗಾರಿ ನಡೆಸಿದ ಸಂಬಂಧ ಸರ್ಕಾರದಿಂದ ಬಿಲ್ ಮಂಜೂರು ಮಾಡಲು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವರಾಗಿದ್ದ ಕೆ.ಎಸ್. ಈಶ್ವರಪ್ಪ ಅವರು ಶೇ.40ರಷ್ಟು ಕಮೀಷನ್ ಕೇಳಿದ್ದರು ಎಂದು ಮೃತ ಸಂತೋಷ್ ಪಾಟೀಲ ಆರೋಪಿಸಿದ್ದರು. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ, ರಾಜ್ಯಪಾಲರಿಗೂ ದೂರು ನೀಡಿದ್ದರು. ಈ ವಿಚಾರ ರಾಷ್ಟ್ರ ಮಟ್ಟದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿತ್ತು.
ಕಳೆದ ಏಪ್ರಿಲ್ನಲ್ಲಿ ಉಡುಪಿ ಲಾಡ್ಜ್ ಒಂದರಲ್ಲಿ ಈಶ್ವರಪ್ಪ ಹೆಸರು ಬರೆದು ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿದ್ದರು.
ಈ ಸಂಬಂಧ ಎಸ್ಪಿ ವಿಷ್ಣುವರ್ಧನ್ ನೇತೃತ್ವದಲ್ಲಿ ತನಿಖೆ ನಡೆಸಿದ ಬಳಿಕ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಲಾಗಿತ್ತು.
