*ಕಾಂಗ್ರೆಸ್ ವಿರುದ್ಧ ಗುಡುಗಿದ ಮೋದಿ*
ಬೆಳಗಾವಿ:ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕಾಂಗ್ರೆಸ್ ಸರ್ಕಾರ ಇರುವೆಲ್ಲ ಕಡೆಯೂ ಕಾನೂನು ಸಮಸ್ಯೆ ಎದುರಾಗಿದೆ. ರಾಜ್ಯದಲ್ಲಿ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.
ಬೆಳಗಾವಿಯ ಮಾಲಿನಿ ಸಿಟಿ ಮೈದಾನದಲ್ಲಿ ಬಿಜೆಪಿ ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದರು.
ಕರ್ನಾಟಕದಲ್ಲಿ ಕಾಂಗ್ರೆಸ್ ನಿಂದ ತುಷ್ಠೀಕರಣ ರಾಜಕಾರಣ ನಡೆಯುತ್ತಿದೆ. ಕೋಮುಗಲಭೆ, ಬಾಂಬ್ ಸ್ಫೋಟದಂತಹ ಪ್ರಕರಣಗಳು ಹೆಚ್ಚುತ್ತಿವೆ. ಬೆಳಗಾವಿಯಲ್ಲಿ ಮಹಿಳೆಯ ಮೇಲೆ ದಾಳಿ ನಡೆಸಲಾಯಿತು. ಚಿಕ್ಕೋಡಿಯಲ್ಲಿ ಜೈನಮುನಿ ಹತ್ಯೆಯಾಗಿದೆ. ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ ನಡೆದಿದೆ. ಬೆಂಗಳೂರಿನಲ್ಲಿ ಕೆಫೆ ಬಾಂಬ್ ಸ್ಫೋಟ ನಡೆಯಿತು. ಭಯದ ವಾತಾವರಣ ನಿರ್ಮಾಣವಾಗಿದೆ ಎಂದು ವಾಗ್ದಾಳಿ ನಡೆಸಿದರು.
ರಾಜ, ಮಹಾರಾಜರ ಜಮೀನು ಕಸಿದುಕೊಂಡರು. ಕಾಂಗ್ರೆಸ್ ವೋಟ್ ಬ್ಯಾಂಕ್ ಗಾಗಿ ಏನುಬೇಕಾದರೂ ಮಾಡುತ್ತದೆ ಎಂದು ಗುಡುಗಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಅಭಿವೃದ್ಧಿ ಬಂದ್ ಆಗಿದೆ. ರಸ್ತೆ, ನೀರು, ಬರ, ಉದ್ಯೋಗ ಸಮಸ್ಯೆಗಳು ರಾಜ್ಯದಲ್ಲಿ ತಾಂಡವವಾಡುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬೆಳಗಾವಿ ಮತ್ತು ಚಿಕ್ಕೋಡಿಯ ಸಹೋದರ ಸಹೋದರಿಯರಿಗೆ ನನ್ನ ನಮಸ್ಕಾರಗಳು ಎಂದು ಕನ್ನಡದಲ್ಲಿ ಮಾತು ಆರಂಭಿಸಿದ ಮೋದಿ, ತಾಯಿ ಭುವನೇಶ್ವರಿ ಮತ್ತು ಸವದತ್ತಿ ಯಲ್ಲಮ್ಮಾಗೆ ಪ್ರಣಾಮ ಸಲ್ಲಿಸುತ್ತೇನೆ ಎಂದರು.
ಕರ್ನಾಟಕದ ಎಲ್ಲ ಮತದಾರರಿಗೆ ಅಭಿನಂದನೆ ಸಲ್ಲಿಸುತ್ತೇನೆ. ನಾನು ಕರ್ನಾಟಕದಲ್ಲಿ ಹೋದಲ್ಲೆಲ್ಲ ಮತ್ತೊಮ್ಮೆ ಮೋದಿ ಸರಕಾರ ಬರಬೇಕೆಂದು ಬಯಸುತ್ತಿದ್ದಾರೆ. ನಾವು ಛತ್ರಪತಿ ಶಿವಾಜಿ, ಭಗವಾನ್ ಬಸವೇಶ್ವರ ಅವರ ಅನುಯಾಯಿಗಳು. ಶಿವಾಜಿ ಪ್ರಜೆಗಳಿಗಾಗಿ ಸಂಘರ್ಷ ಮಾಡಿದವರು, ಬಸವೇಶ್ವರರು ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ಮಹತ್ವ ಸಾರಿದವರು. ಭಾರತ ಪ್ರಜಾಪ್ರಭುತ್ವದ ತಾಯಿಯಾಗಿದೆ ಎಂದು ಮೋದಿ ಹೇಳಿದರು.
ಕಳೆದ 10 ವರ್ಷದಲ್ಲಿ 25 ಕೋಟಿ ಜನರು ಬಡತನದಿಂದ ಹೊರಗೆ ಬಂದಿದ್ದಾರೆ. ಹಾಗಾಗಿ ಜನರ ವಿಶ್ವಾಸ ವೃದ್ಧಿಯಾಗಿದೆ. ಬಡವರ ಕಲ್ಯಾಣಕ್ಕಾಗಿ ಮತ್ತೊಮ್ಮೆ ಬಿಜೆಪಿ ಸರಕಾರ ಬರಬೇಕು. ಭಾರತ ಇನ್ನಷ್ಟು ಬಲಾಢ್ಯವಾಗಲಿದೆ, ಭಾರತೀಯರು ಖುಷಿಯಾಗುತ್ತಾರೆ ಎಂದು ಮೋದಿ ಹೇಳಿದರು.
ಕೊರೋನಾ ಸಂದರ್ಭದಲ್ಲಿ ಕೊರೋನಾ ವ್ಯಾಕ್ಸಿನ್ ಗೂ ಕಾಂಗ್ರೆಸ್ ವಿರೋಧಿಸಿತ್ತು, ಇದು ಬಿಜೆಪಿ ವ್ಯಾಕ್ಸಿನ್ ಎಂದರು. ಇವಿಎಂ ಗೂ ವಿರೋಧಿಸಿದರು. ಇದು ಪ್ರಜಾಪ್ರಭುತ್ವಕ್ಕೆ ಮಾಡಿದ ಅವಮಾನವಾಗಿದೆ. ದೇಶಕ್ಕೆ ಅವಮಾನವಾಗುವ ರೀತಿಯಲ್ಲಿ ಮಾತನ್ನಾಡುವ ಮೂಲಕ ಕಾಂಗ್ರೆಸ್ ರಾಷ್ಟ್ರ ತಲೆ ತಗ್ಗಿಸುವಂತೆ ಮಾಡುತ್ತಿದೆ. ಇವಿಎಂ ಬಗ್ಗೆ ಸುಳ್ಳು ಹೇಳುವ ಮೂಲಕ ಲೋಕತಂತ್ರವನ್ನು ಬರ್ಬಾದ್ ಮಾಡಲು ಮುಂದಾಗಿದೆ ಎಂದು ಅವರು ಹೇಳಿದರು.